ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.೦೪: ಸರ್ಕಾರದಿಂದ ೧೨ ರಿಂದ ೧೪ ವರ್ಷದ ಒಳಗಿನ ಮಕ್ಕಳಿಗೆ ಉಚಿತವಾಗಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ
ಹಾಕಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಬಿ.ವಿ. ಗಿರೀಶ್ ಹೇಳಿದರು.
ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ೧೨ ರಿಂದ ೧೪ ವರ್ಷದ ಮಕ್ಕಳಿಗೆ ಲಸಿಕೆ ನೀಡವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಕೋರ್ಬಿವ್ಯಾಕ್ಸ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಪೋಷಕರು ಭಯ ಪಡದೇ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಇದರಿಂದ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದರು.
ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ಮಕ್ಕಳ ವಾರ್ಷಿಕ ಪರೀಕ್ಷೆಗಳು ಮುಗಿದಿವೆ. ಮಕ್ಕಳು ಶಾಲೆಗೆ ಬರಲು ನಿರಾಶಕ್ತಿ ತೋರುತ್ತಾರೆ. ಆರೋಗ್ಯ ಅಧಿಕಾರಿ, ಆಶಾ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಪ್ರತಿಯೊಬ್ಬ ಮಕ್ಕಳ ಪೋಷಕರಿಗೆ ಕರೆ ಮಾಡಿ ಶಾಲೆಗೆ ಕರೆಸಿ ತಪ್ಪದೇ ಲಸಿಕೆ ಕೊಡಿಸಬೇಕೆಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ಲಸಿಕೆ ಪಡೆದ ಮಕ್ಕಳು ೨೮ ದಿನದ ನಂತರ ಪುನಃ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆ ಪಡೆದ ಸ್ಥಳದಲ್ಲಿ ಉಜ್ಜಬಾರದು. ಅರ್ಧಗಂಟೆ ವಿರಾಮ ತೆಗೆದುಕೊಂಡು ಮಕ್ಕಳು ಮನೆಗೆ ತೆರಳುವುದು ಒಳಿತು ಎಂದರು.
ಈ ಸಂದರ್ಭದಲ್ಲಿ ೯೫ ಮಕ್ಕಳಿಗೆ ಲಸಿಕೆ ನೀಡಲಾಯಿತು. ಮುಖ್ಯೋಪಾಧ್ಯಾಯಿನಿ ಎಂ.ಎನ್. ಶಾಂತ, ಆರೋಗ್ಯ ನಿರೀಕ್ಷಣ ಅಧಿಕಾರಿ ಸುನಿಲ್ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಾರದಮ್ಮ, ಆಶಾಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಜರಿದ್ದರು.
[t4b-ticker]
+ There are no comments
Add yours