ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 7: ಬಾಲಕಾರ್ಮಿಕ ಪದ್ದತಿಯ ದುಷ್ಟ ಪರಿಣಾಮದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 12 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆಯನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂನ್ 6 ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಪಂಚದಾದ್ಯಂತ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿಯ ಘೋಷ್ಯವಾಕ್ಯ “ಯುನಿವರ್ಸಲ್ ಸೋಶಿಯಲ್ ಪ್ರೊಟೆಕ್ಷನ್ ಟು ಎಂಡ್ ಚೈಲ್ಡ್ ಲೇಬರ್” ಎಂಬುದಾಗಿದೆ. ಬಾಲ ಕಾರ್ಮಿಕ ಪದ್ದತಿ ಅಂತ್ಯಕ್ಕೆ ವಿಶ್ವದ ಎಲ್ಲರೂ ಕೈಜೋಡಿಸಬೇಕು ಎಂಬ ಧ್ಯೇಯ ಇದಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಕಡ್ಡಾಯವಾಗಿ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು. ದಿನಾಚರಣೆಯಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಬೈಕ್ ರಾಲಿ ಆಯೋಜಿಸಬೇಕು ಎಂದರು.
ತಾಲೂಕು ಕಾನೂನು ಸೇವಾ ಪ್ರಾಧಿಕಾರ, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು, ಕಾರ್ಮಿಕ ಸಂಘಟನೆಗಳು, ಉದ್ಯೋಗಾದಾತರ ಸಂಘಗಳ ಸಹಯೋಗದೊಂದಿಗೆ ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಮಾಡಲಾಗುವುದು. ನಗರದ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಆವರಣದಿಂದ ತ.ರಾ.ಸು ರಂಗಮಂದಿರದವರೆಗೆ ಜಾಥ ಆಯೋಜಿಸಲಾಗುವುದು. ಬಾಲ ಕಾರ್ಮಿಕ ಪದ್ದತೆ ವಿರೋಧಿ ಪ್ಲಗ್ ಕಾರ್ಡು, ಪೋಸ್ಟರ್ ಸ್ಟಿಕ್ಕರ್ಗಳನ್ನು ವಾಣಿಜ್ಯ ಸಂಸ್ಥೆಗಳ ಮುಂದೆ ಅಂಟಿಸಲಾಗುವುದು. ಕರಪತ್ರಗಳನ್ನು ಹಂಚಲಾಗುವುದು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
[t4b-ticker]
+ There are no comments
Add yours