ಅ. 30 ರಂದು ಗುಲ್ಬರ್ಗದಲ್ಲಿ ಹಿಂದುಳಿದ ವರ್ಗಗಳ ಜನಜಾಗೃತಿ ರಾಜ್ಯ ಮಟ್ಟದ ಸಮಾವೇಶ

 

 

 

 

ಚಿತ್ರದುರ್ಗ: ರಾಜ್ಯದಲ್ಲಿನ ಸಣ್ಣ ಸಣ್ಣ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಜೊತೆ ಜೋಡಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶವನ್ನಿಟ್ಟುಕೊಂಡು ಅ.30 ರಂದು ಗುಲ್ಬರ್ಗದಲ್ಲಿ ಹಿಂದುಳಿದ ವರ್ಗಗಳ ಜನಜಾಗೃತಿ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ ಎಂದು ಬಿಜೆಪಿ.ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದಿಂದ ಸುಮಾರು ಮೂರು ಲಕ್ಷ ಜನ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪಕ್ಷದ ವರಿಷ್ಠರು ಎಲ್ಲಾ ಹಿಂದುಳಿದ ಸಮುದಾಯದವರನ್ನು ಒಂದು ಕಡೆ ಸೇರಿಸುವ ಚಿಂತನೆ ನಡೆಸುತ್ತಿದ್ದಾರೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಹಿಂದುಳಿದ ಸಮುದಾಯದವರನ್ನು ಸಮಾವೇಶಕ್ಕೆ ಕರೆದುಕೊಂಡು ಹೋಗಲಾಗುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.50 ರಷ್ಟು ಹಿಂದುಳಿದ ವರ್ಗಗಳ ಜನಾಂಗವಿದ್ದು, ನರೇಂದ್ರಮೋದಿ ದೇಶದ ಪ್ರಧಾನಿಯಾದ ಬಳಿಕ ಹಿಂದುಳಿದವರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದಾರೆಂದು ಹೇಳಿದರು.
ಕೇಂದ್ರ ಸರ್ಕಾರದಲ್ಲಿ ಹಿಂದುಳಿದವರು 27 ಮಂತ್ರಿಗಳಿದ್ದಾರೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಸಂವಿಧಾನಿಕ ಮಾನ್ಯತೆ ನೀಡಲಾಗಿದೆ. ಹಿಂದುಳಿದವರಿಗಾಗಿಯೇ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ನೀಡಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆಯುಷ್ಮಾನ್ ಆರೋಗ್ಯ ಭಾರತ್, ಮಿಷನ್ ಕರ್ಮಯೋಗಿ ಯೋಜನೆಯಡಿ ಕುಶಲಕರ್ಮಿಗಳಿಗೆ ಬಜೆಟ್‍ನಲ್ಲಿ ಪ್ರತ್ಯೇಕ ಹಣ ಮೀಸಲು, ರಾಷ್ಟ್ರೀಯ ಗೋಕುಲ್ ಮಿಷನ್ ಇವು ಪ್ರಮುಖ ಯೋಜನೆಗಳು ಎಂದರು.
ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿರುವ ಭಾರತ್ ಜೋಡೋಯಾತ್ರೆ ರಾಜ್ಯದಲ್ಲಿ ಯಾವ ಪರಿಣಾಮವನ್ನು ಬೀರುವುದಿಲ್ಲ. ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಕೊಡುಗೆ ಏನು ಇಲ್ಲ. ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗುತ್ತಿದೆ. ಗುಲ್ಬರ್ಗದಲ್ಲಿ ನಡೆಯುವ ಹಿಂದುಳಿದ ವರ್ಗಗಳ ಜನಜಾಗೃತಿ ರಾಜ್ಯ ಮಟ್ಟದ ಸಮಾವೇಶಕ್ಕೆ ರಾಷ್ಟ್ರಮಟ್ಟದ ನಾಯಕರುಗಳು ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿ, ಎಲ್ಲಾ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಹಿಂದಿನ ಸರ್ಕಾರಗಳು ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತರುವಲ್ಲಿ ವಿಫಲವಾಗಿವೆ ಎಂದು ಆಪಾದಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಗುಲ್ಬರ್ಗದಲ್ಲಿ ನಡೆಯುವ ಹಿಂದುಳಿದ ವರ್ಗಗಳ ರಾಜ್ಯ ಮಟ್ಟದ ಜನಜಾಗೃತಿ ಸಮಾವೇಶಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆದಿದ್ದು, ಹಿಂದುಳಿದ ವರ್ಗಗಳ ಸಮಸ್ಯೆ, ಕುಂದುಕೊರತೆ ಹಾಗೂ ಸವಾಲುಗಳ ಕುರಿತು ಸಮಾವೇಶದಲ್ಲಿ ಚರ್ಚೆಯಾಗಲಿದೆ. ನಮ್ಮ ಜಿಲ್ಲೆಯಿಂದ ಸುಮಾರು ಎರಡು ಸಾವಿರ ಜನರನ್ನು ಕರೆದುಕೊಂಡು ಹೋಗುವುದಾಗಿ ತಿಳಿಸಿದರು.
ಬಿಜೆಪಿ.ಜಿಲ್ಲಾ ಉಪಾಧ್ಯಕ್ಷ ಸಂಪತ್‍ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲ್, ನರೇಂದ್ರ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಪ್ರವೀಣ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

 

 

[t4b-ticker]

You May Also Like

More From Author

+ There are no comments

Add yours