ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು

 

 

 

 

ಚಿತ್ರದುರ್ಗ ಡಿ. 16 (ಕರ್ನಾಟಕ ವಾರ್ತೆ) :
ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ   (Indira Canteen)
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ಬೆಳ್ಳಂ ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.
ಪ್ರವಾಸಿ ಮಂದಿರದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಡುಗೆ ತಯಾರಿಕೆ ಕೊಠಡಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ, ಶುಚಿ-ರುಚಿ ಕೊರತೆ, ದಾಖಲೆಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ.  ಕ್ಯಾಂಟೀನ್‍ನಲ್ಲಿ ಉಪಹಾರ ಹಾಗೂ ಊಟದ ತಯಾರಿಕೆ ಉತ್ತಮವಾಗಿಲ್ಲ, ಉಪಹಾರ ರುಚಿಕಟ್ಟಾಗಲು ಅಗತ್ಯವಿರುವ ಸಾಮಗ್ರಿಗಳ ಸಮರ್ಪಕ ಬಳಕೆಯಾಗುತ್ತಿಲ್ಲ, ಹೀಗಾಗಿ ಸಾರ್ವಜನಿಕರು ಇಂದಿರಾ ಕ್ಯಾಂಟೀನ್‍ಗೆ ಹೆಚ್ಚು ಬರುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಕಡಿಮೆ ದರದಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಹಾಗೂ ರುಚಿಯಾದ ಊಟೋಪಹಾರ ಒದಗಿಸಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಿವಿಧೆಡೆ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿ, ನಡೆಸಲಾಗುತ್ತಿದೆ.  ಆದರೆ ಸಿಬ್ಬಂದಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕ್ಯಾಂಟೀನ್ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ.  ಕ್ಯಾಂಟೀನ್‍ಗೆ ಎಷ್ಟು ಆಹಾರ ಧಾನ್ಯ ಹಾಗೂ ಅಡುಗೆ ಸಾಮಗ್ರಿ ಸ್ವೀಕರಿಸಲಾಗಿದೆ, ಎಷ್ಟು ಪ್ರಮಾಣದಲ್ಲಿ ಎಷ್ಟು ಜನರಿಗೆ ಊಟೋಪಹಾರ ವಿತರಿಸಲಾಗಿದೆ ಎಂಬುದರ ಬಗ್ಗೆ ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಿಲ್ಲ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ಇಂದಿರಾ ಕ್ಯಾಂಟೀನ್‍ಗೆ ಆಹಾರದ ಗುಣಮಟ್ಟ ಪರಿಶೀಲನೆಗೆ ಸಂಬಂಧಪಟ್ಟ ಅಧಿಕಾರಿ ಪ್ರತಿ ನಿತ್ಯ ಭೇಟಿ ಮಾಡಿ ಪರಿಶೀಲಿಸಬೇಕು,  ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳು ವಾರಕ್ಕೊಮ್ಮೆ ಕ್ಯಾಂಟೀನ್‍ಗೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಮತ್ತು ಊಟ ಸೇವಿಸಿ ಪರಿಶೀಲಿಸಬೇಕು.  ಅಲ್ಲದೆ ಅಡುಗೆ ಸಾಮಗ್ರಿಗಳ ದಾಸ್ತಾನು, ಬಳಕೆ, ಊಟೋಪಹಾರ ವಿತರಣೆ ಪ್ರಮಾಣ ಕುರಿತಂತೆ ನಿತ್ಯ ರಜಿಸ್ಟರ್‍ನಲ್ಲಿ ಮಾಹಿತಿ ದಾಖಲಾಗಬೇಕು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆರೋಗ್ಯ ನಿರೀಕ್ಷಕರು ಸ್ವಚ್ಛತೆ ಹಾಗೂ ಶುಚಿತ್ವ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳು ನಿತ್ಯ ಕ್ಯಾಂಟೀನ್‍ನಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಬರುವ ದಿನಗಳಲ್ಲಿ ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‍ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು, ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಹೇಳಿದರು.
ಇಂದಿರಾ ಕ್ಯಾಂಟಿನ್ ಭೇಟಿ ನೀಡಿದ ಡಿಸಿ ದಿವ್ಯಪ್ರಭು ಭೇಟಿ ಸಂದರ್ಭ

ಕಸ ವಿಲೇವಾರಿ ಸಮರ್ಪಕವಾಗಿಸಿ :

 

 

***********ನಗರದ ವಿವಿಧೆಡೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮನೆ ಮನೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ ಕಾರ್ಯ ಸಮರ್ಪಕವಾಗಿ ಆಗಬೇಕು, ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಿಯೇ ಪಡೆಯಬೇಕು, ನಗರದ ಚರಂಡಿಗಳನ್ನು ಸ್ವಚ್ಛವಾಗಿರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಅಭಿಯಂತರ ಜಾಫರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours