ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ಕಿಡಿಕಾರಿದ್ದಾರೆ.
ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್:
‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ಆರಂಭಿಸಿದ್ದಾರೆ.
‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.





