ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ, ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಶೇಖರ ಕುಕ್ಕೇಡಿ ಅವರು ಅರ್ಜಿ ಸಲ್ಲಿಸಿದ್ದು, ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷರಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಶೇಖರ ಕುಕ್ಕೇಡಿ ಅವರು ಜಿಲ್ಲಾಪಂಚಾಯತು ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ನಾಯಕತ್ವಕ್ಕೆ ಏರಿದ ಶೇಖರ ಕುಕ್ಕೇಡಿ ಅವರು ಸದಾ ಕಾರ್ಯಕರ್ತರೊಂದಿಗೆ ಗುರುತಿಸಿಕೊಂಡಿದ್ದಾರೆ. ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಓಡಾಟ ನಡೆಸಿ ಪಕ್ಷ ಸಂಘಟನೆ ಮಾಡಿರುವ ಅನುಭವವೂ ಅವರಿಗಿದೆ.

ಈಗ ಜಿಲ್ಲಾ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರು ಕಳೆದ ೯ ವರ್ಷಗಳಿಂದ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಹೊಸಅಧ್ಯಕ್ಷರ ಆಯ್ಕೆಗೆ ಪಕ್ಷ ಮುಂದಾಗಿದೆ.



