ಜಲ ಸಂರಕ್ಷಣೆ ಯೋಜನೆ ಅನುಷ್ಠಾನಕ್ಕೆ ರೂ. 10 ಕೋಟಿ ಅನುದಾನಕ್ಕೆ ಶ್ರಮ: ಶಾಸಕ ಉಮಾನಾಥ ಕೋಟ್ಯಾನ್


ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ ಮತ್ತು ರೋಟರಿ ಕ್ಲಬ್ ನೇತೃತ್ವದಲ್ಲಿ ಕಡಲಕೆರೆಗೆ ಮೀನು ಮರಿಗಳನ್ನು ಬಿಡುವ, ಬೋಟಿಂಗ್ಗೆ ಚಾಲನೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಶನಿವಾರ ನಡೆಯಿತು. ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಕಾಟ್ಟಾ ರೋಹೋ ಮತ್ತು ಕಾಮನ್ ಕಾರ್ಪ್ ತಳಿಯ 20,000 ಮೀನು ಮರಿಗಳನ್ನು ಕಡಲಕೆರೆಯಲ್ಲಿ ಸಮರ್ಪಿಸಿ, ಬೋಟಿಂಗ್ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಉಮಾನಾಥ ಎ. ಕೋಟ್ಯಾನ್, ಕಡಲಕೆರೆಯಲ್ಲಿ ವರ್ಷವಿಡೀ ಜಲಸಂರಕ್ಷಣೆ ಮಾಡುವ ನಿಟ್ಟಿನಲ್ಲಿ 10 ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಆರು ವರ್ಷಗಳ ಹಿಂದೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅನುದಾನ ಲಭಿಸದ ಹಿನ್ನೆಲೆಯಲ್ಲಿ ಯೋಜನೆ ಕಾರ್ಯಗತಗೊಂಡಿಲ್ಲ. ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಗಮನ ಸೆಳೆದು ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಯೋಜನೆ ಸಾಕಾರಗೊಂಡಲ್ಲಿ ಮತ್ರೋದ್ಯಮದ ಬೆಳವಣಿಗೆಯ ಜತೆಗೆ ಜಲಸಂರಕ್ಷಣೆಯೂ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕಾಶ್ ಮಾತನಾಡಿ, ಅರಣ್ಯ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕು ಹಾಗೂ ಕಡಲಕೆರೆಯ ನೀರಿಗೆ ಕಾರ್ಖಾನೆಗಳಿಂದ ಕಲುಷಿತ ನೀರು ಸೇರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ, ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ. ಎಂ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್ ಆಚಾರ್, ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ. ಕೆ. ತೋಮಸ್, ಪುರಸಭೆಯ ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ನಿಶ್ಚಿತಾ, ಹಿರಿಯ ನ್ಯಾಯವಾದಿ ಕೆ. ಆರ್. ಪಂಡಿತ್ ಹಾಗೂ ದೋಣಿ ವಿಹಾರದ ನಿರ್ವಾಹಕರಾದ ಡಾ. ಎಂ. ಎಸ್. ನಝೀರ್ ಉಪಸ್ಥಿತರಿದ್ದರು.
ಉಪ ವಲಯಾರಣ್ಯಾಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಬಸಪ್ಪ ಹಾಗೂ ಗಸ್ತು ಅರಣ್ಯ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಗಳೂರು ವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಸ್ವಾಗತಿಸಿ ವಂದಿಸಿದರು.



