ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಮುಖ್ಯವಾಹಿನಿಗೆ ತರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಚಿತ್ರದುರ್ಗದ ಯಶಸ್ವಿ ಕಾರ್ಯಕ್ರಮ ಇತರೆ ಜಿಲ್ಲೆಗಳು ಅನುಸರಿಸಲಿ :
*************
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಗಳಿಸಿತ್ತು. ಈ ರೀತಿಯ ಯಶಸ್ವಿಗೆ ಜಿಲ್ಲೆಯಲ್ಲಿ ಅನುಸರಿಸಿದ ಕಾರ್ಯಕ್ರಮಗಳು, ವಿಷಯವಾರು ಕಾರ್ಯಗಾರಗಳು, ಯೋಜನಾಬದ್ಧ ವ್ಯವಸ್ಥೆಯನ್ನು ಇತರೆ ಜಿಲ್ಲೆಗಳೂ ಕೂಡ ಅನುಸರಿಸಬೇಕು. ಇಡೀ ರಾಜ್ಯಕ್ಕೂ ಕೂಡ ಅಳವಡಿಸಬಹುದಾಗಿದೆ ಎಂದು ಸಚಿವರು ಸಲಹೆ ನೀಡಿದರು.
“ನನ್ನ ಶಾಲೆ ನನ್ನ-ಜವಾಬ್ದಾರಿ” ಕಾರ್ಯಕ್ರಮ:
**ಶಾಲೆಗಳ ಸರ್ವತೋಮುಖ ಅಭಿವೃದ್ದಿಗೆ “ನನ್ನ ಶಾಲೆ-ನನ್ನ ಜವಾಬ್ದಾರಿ” ಎಂಬ ಕಾರ್ಯಕ್ರಮ ರೂಪಿಸಿ, ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಸಚಿವ ಮಧು ಎಸ್.ಬಂಗಾರಪ್ಪ ತಿಳಿಸಿದರು.
ಬಹಳಷ್ಟು ಸರ್ಕಾರಿ ಶಾಲೆಗಳು ದಾನಿಗಳ ಕೊಡುಗೆಯಾಗಿವೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಬಹಳಷ್ಟು ಜನರು ಉನ್ನತ ಸ್ಥಾನ ಅಲಂಕರಿಸಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದವರು ಸರ್ಕಾರದ ಯಾವುದೇ ಅನುದಾನ ಬಳಸದೇ ಉತ್ತಮ ಗುಣಮಟ್ಟದ ಶಾಲೆಗಳನ್ನು ನಿರ್ಮಿಸಿದ್ದಾರೆ. ಹಾಗಾಗಿ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಶಿಕ್ಷಕರು ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಚಿವರು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, 2023-24ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ 429 ಮಕ್ಕಳಲ್ಲಿ ಈಗಾಗಲೇ 381 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. 48 ಮಕ್ಕಳು ಶಾಲೆಯಿಂದ ಹೊರಗುಳಿದ್ದು, ಈ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಪ್ರಾಥಮಿಕ 6,275 ಹಾಗೂ ಪ್ರೌಢಶಾಲಾ 1,215 ಸರ್ಕಾರಿ ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 5,258 ಪ್ರಾಥಮಿಕ ಹಾಗೂ 1,029 ಪ್ರೌಢಶಾಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 1,017 ಪ್ರಾಥಮಿಕ ಹಾಗೂ 186 ಪ್ರೌಢ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಿ, ಪಾಠ ಪ್ರವಚನಗಳನ್ನು ನಡೆಸಲಾಗುತ್ತಿದೆ. 263 ಹೊಸ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಾಗಿದ್ದು, ಈಗಾಗಲೇ ನೇಮಕಾತಿ ಆದೇಶ ನೀಡಲಾಗಿದೆ. 11 ಶಿಕ್ಷಕರಿಗೆ ಮಾತ್ರ ನೇಮಕಾತಿ ಆದೇಶ ಬಾಕಿ ಇದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಾವುದೇ ಶಿಕ್ಷಕರ ಕೊರತೆ ಇಲ್ಲ ಎಂದರು.
ಚಳ್ಳಕೆರೆ ತಾಲ್ಲೂಕು ಅಭಿಷೇಕ್ ನಗರ ಹಾಗೂ ಹಿರಿಯೂರು ತಾಲ್ಲೂಕು ಕೆರೆಮುಂದಲಹಟ್ಟಿಯಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳ ಬೇಡಿಕೆ ಇದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಈ ಶಾಲೆಗಳನ್ನು ಪ್ರೌಢಶಾಲೆಗಳಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಹೊಸದಾಗಿ 23 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಇದನ್ನೂ ಓದಿ: ಜನವರಿ 24ರಂದು ವಿದ್ಯುತ್ ವ್ಯತ್ಯಯ
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಜಿಲ್ಲಾ ಹಂತದಲ್ಲಿ ವಿಷಯವಾರು ಕಾರ್ಯಾಗಾರಗಳನ್ನು ನಡೆಸಿ, ವಿಷಯವಾರು ಪರೀಕ್ಷಾ ಪೂರಕ ಸಾಹಿತ್ಯಗಳನ್ನು ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಬಿಡುಗಡೆ ಮಾಡಿದರು.
+ There are no comments
Add yours