ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆಯಾಗಿರುವುದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು, ಪೋಷಕರ ನಿರಾಸೆಗೆ ಕಾರಣವಾಗಿದೆ. ಸದ್ಯ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಕೆಎಸ್ಇಎಬಿ ಪತ್ರ ಬರೆದಿದೆ. ಅನುಮತಿ ಸಿಕ್ಕ ಕೂಡಲೇ ಸೆಕೆಂಡ್ ಪಿಯುಸಿ ರಿಸಲ್ಟ್ ಘೋಷಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಫಲಿತಾಂಶ ಮುಂದೂಡಿಕೆಗೆ ಕಾರಣ ಏನೆಂಬ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಏಪ್ರಿಲ್ 7) ಪ್ರಕಟವಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ. ಆದರೆ, ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಿಕೆ ಮಾಡಲು ಅಸಲಿ ಕಾರಣ ಏನೆಂಬುದು ಈಗ ಬಹಿರಂಗವಾಗಿದೆ.
ಚುನಾವಣಾ ನೀತಿ ಸಂಹಿತೆ ಅಡ್ಡಿ
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ.
ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿರುವ ಮಂಡಳಿ
ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಕೆಎಸ್ಇಎಬಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಆಯೋಗವು ಅನುಮತಿ ನೀಡಿದ ತಕ್ಷಣವೇ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲು ಮಂಡಳಿ ಸರ್ವ ಸಿದ್ಧತೆ ಮಾಡಿಕೊಂಡಿದೆ. 2018 ಮತ್ತು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಅಧಿಕಾರಿಗಳ ಮೂಲಕ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಆಯೋಗದ ಒಪ್ಪಿಗೆ ಸಿಗದ ಕಾರಣ ಅನಿವಾರ್ಯವಾಗಿ ವಿಳಂಬವಾಗಿದೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಲಾಖೆಯು ನಿಗದಿತ ಗುರಿಯಂತೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆಯೋಗದಿಂದ ಒಪ್ಪಿಗೆ ಸಿಕ್ಕ ಕೂಡಲೇ ಫಲಿತಾಂಶ ಪ್ರಕಟ ಮಾಡಲಿದೆ.





