ವಿವಿಧ ಕಾಮಗಾರಿಗಳ ಉದ್ಘಾಟನೆ: ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಚಿವರಾದ ಬಿ.ಶ್ರೀರಾಮುಲು ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಟ್ಟಣದ ಶ್ರೀನಿವಾಸ ನಾಯಕ ಬಡಾವಣೆ ಹಾಗೂ ಎದ್ದು ಬೊಮ್ಮನಹಟ್ಟಿ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ ನೆರವೇರಿಸಿದರು.
ನಂತರ ಪಟ್ಟಣ ಪಂಚಾಯಿತಿ ವತಿಯಿಂದ ಮುಕ್ತಿ ವಾಹನಕ್ಕೆ ಚಾಲನೆ ನೀಡಿ, ಮೊಳಕಾಲ್ಮುರು ಪಟ್ಟಣದ ನಾಗರಿಕರಿಗೆ ಮುಕ್ತಿ ವಾಹನವನ್ನು ಲೋಕಾರ್ಪಣೆಗೊಳಿಸಲಾಯಿತು.
ವ್ಯಾಕ್ಸಿನ್ ಬರುವವರೆಗೂ ಜಾಗೃತಿ ವಹಿಸಿ: ಅಂಗವಿಕಲರಿಗೆ ವಾಹನ ವಿತರಣೆ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ರಾಜ್ಯದಲ್ಲಿ ಸುಮಾರು 5 ಲಕ್ಷ ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡುತ್ತಿದ್ದು, ಪ್ರತಿಯೊಬ್ಬರು ಮಾಸ್ಕ್ ಧರಿಸುತ್ತಿದ್ದಾರೆ. ಇದರ ಜೊತೆಗೆ ಎಲ್ಲರೂ ಮುಂಜಾಗ್ರತೆ ವಹಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಕೋವಿಡ್ ಸೋಂಕು ನಿವಾರಣೆಗೆ ವ್ಯಾಕ್ಸಿನ್ ಬರುವವರೆಗೂ ಎಲ್ಲರೂ ಜಾಗೃತಿ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಆರೋಗ್ಯ ಇಲಾಖೆಯಲ್ಲಿ ಬಹಳಷ್ಟು ಬದಲಾವಣೆ ಹಾಗೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕೋವಿಡ್ ಸಂದರ್ಭದಲ್ಲಿ ಅಧಿಕಾರಿಗಳಿಗೆ, ನೌಕರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರವು ಕ್ರಮಕೈಗೊಳ್ಳಲಿದೆ. ಈಚೆಗೆ ಪೈನಾನ್ಸ್ ಬಜೆಟ್ ಕ್ಲಿಯರ್ ಆಗಿದ್ದು, ಅದರಲ್ಲಿ ಹೆಚ್ಚಿನ ಅನುದಾನವನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಯಪಾಲಯ್ಯ, ತಹಶೀಲ್ದಾರ್ ಮಲ್ಲಿಕಾರ್ಜುನ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಸಿಡಿಪಿಒ ಸವಿತಾ, ಮೊಳಕಾಲ್ಮುರು ಪಟ್ಟಣ ಮೇಲ್ಚಿಚಾರಕಿ ಪಿರ್ದೋಸ್, ರಾಂಪುರ ವೃತ್ತದ ಮೇಲ್ವಿಚಾರಕಿ ಲೀಲಾಬಾಯಿ, ಪೋಷಣ್ ಅಭಿಯಾನ್ ಯೋಜನಾ ಸಂಯೋಜಕ ಹನುಮಂತಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
+ There are no comments
Add yours