ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

 

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ರಾತ್ರಿ ನಡೆಸಿದ ಮಾತುಕತೆ ವಿಫಲವಾದ ನಂತರ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದರು.

ನಾಳೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಳಿಕ ನನ್ನ ಮುಂದಿನ ನಿಲುವು ಏನೆಂದು ಹೇಳುತ್ತೇನೆ” ಎಂದು ತಿಳಿಸಿದರು.

”ಬಿಜೆಪಿ ಅಧಿಕಾರಕ್ಕೆ ಬಂದ್ರೆ ಶೆಟ್ಟರ್ ಸಿಎಂ ರೇಸ್ ಗೆ ಬರ್ತಾರೆ ಅನ್ನೋ ಭಯವಿದೆ. ಹಾಗಾಗಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಸ್ಪರ್ಧೆ ಮಾಡೋದು ನಿಶ್ಚಿತ. ಪ್ರಮುಖರ ಅಭಿಪ್ರಾಯ ತೆಗೆದುಕೊಂಡು ಮುಂದಿ‌ನ ನಿರ್ಧಾರ ಕೈಗೊಳ್ಳುತ್ತೇನೆ” ಎಂದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದ್ದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಸೇರಿದಂತೆ 12 ಕ್ಷೇತ್ರಗಳಿಗೆ ಬಿಜೆಪಿ ಇನ್ನಷ್ಟೇ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

[t4b-ticker]

You May Also Like

More From Author

+ There are no comments

Add yours