ಬೆಂಗಳೂರು, ಮೇ27: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಎಂಟು ಸ್ಥಾನ
ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು, ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ಲಿಂಗಾಯತರ ಖೋಟಾದಲ್ಲಿ ಸಚಿವರಾಗಿದ್ದಾರೆ.
ಒಕ್ಕಲಿಗರಲ್ಲಿ ಐದು ಜನರಿಗೆ ಸಚಿವ ಸ್ಥಾನ
ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.
ದಲಿತ ಸಮುದಾಯಕ್ಕೆ ಬರೋಬ್ಬರಿ 6 ಸಚಿವ ಸ್ಥಾನ
ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತುಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ.
ನಾಯಕ ಸಮುದಾಯಕ್ಕೆ ಮೂರು
ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.
ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.
ಮುಸ್ಲಿಂ ಸಮುದಾಯದಿಂದ ಇಬ್ಬರು ಸಚಿವ ಸ್ಥಾನ
ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.
[t4b-ticker]
+ There are no comments
Add yours