ಚಿತ್ರದುರ್ಗ, ನ.28: ವಿಕೊಚೇತನರು ತಮ್ಮಲ್ಲಿನ ಕೀಳರಿಮೆಯನ್ನು ಬಿಟ್ಟು, ಕ್ರೀಡೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಭಾಗವಹಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಕರೆ ನೀಡಿದರು.
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಗವಿಕಲರಲ್ಲೂ ಸಾಕಷ್ಟು ಪ್ರತಿಭಾವಂತರಿರುತ್ತಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಅಂಗವಿಕಲತೆ ಎಂಬುವುದು ಕೇವಲ ತಮ್ಮ ದೇಹಕ್ಕೆ ಹೊರತು ಮನಸ್ಸಿಗೆ ಅಲ್ಲ. ಯಾವುದೇ ವ್ಯಕ್ತಿ ಸದೃಡ ನಿರ್ಧಾರವನ್ನು ಹೊಂದಿದರೆ ಎಂತಹ ಸಾಧನೆಯನ್ನಾದರೂ ಮಾಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಸಂಗೀತ, ಕ್ರೀಡೆ ಸೇರಿದಂತೆ ಇತರೆ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ತೋರಲು ಇಚ್ಚಾಶಕ್ತಿ ಬೆಳೆಸಿಕೊಳ್ಳಬೇಕು. ಯಾರೇ ಆಗಲಿ ಅಂಗವಿಕಲರನ್ನು ತಾತ್ಸಾರ ಮನೋಭಾವದಿಂದ ನೋಡಬಾರದು. ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಹೇಳಿದ ಅವರು, ಅಂಗವಿಕರು
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೊಂದಾಣಿ ಮಾಡಿಸಿಕೊಳ್ಳಬೇಕು. ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಇದು ಅನುಕೂಲ ಆಗಲಿದೆ ಎಂದು ಹೇಳಿದರು.
ವಿಕಲಚೇತನರು ಎಲ್ಲಾ ರಂಗಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ತಾವು ಯಾರುಗಿಂತಲೂ ಕಡಿಮೆ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಚಳ್ಳಕೆರೆಯ ಬಾಲಕಿ ಕ್ರೀಡೆಯಲ್ಲಿ ಭಾಗವಹಿಸಿ ಬಂಗಾರದ ಪದಕ ಗೆದ್ದಿರುವುದು. ಇದೇ ರೀತಿ ಪ್ರತಿಯೊಬ್ಬರು ಯಾವ ಹಂತದಲ್ಲೂ ಕೂಡ ಎದೆಗುಂದದೆ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ ಜೆ. ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ರಂಗಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.
+ There are no comments
Add yours