ದೆಹಲಿ: ಭಾರಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ತಳೆದಿದ್ದು, ಪ್ರಕರಣದ ಮರುತನಿಖೆಗೆ ಒಪ್ಪಿಗೆ ಸೂಚಿಸಿದೆ.

ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ ದೇಶದ ಅತ್ಯುನ್ನತ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ. ಮತ್ತೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ. ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.



