ಕರ್ನಾಟಕದಲ್ಲಿ ಯಾರು ಸಿಎಂ ಆಗ್ತಾರೆ ಎನ್ನುವ ಗೊಂದಲಗಳಿಗೆ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಲವೇ ಹೊತ್ತಿನಲ್ಲಿ ಹೈಕಮಾಂಡ್ ಸಿಎಂ ಹೆಸರು ಘೋಷಣೆ ಮಾಡಲಿದೆ. ಇಂದು ಉನ್ನತ ಮಟ್ಟದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದ್ದು ಘೋಷಣೆಯೊಂದೇ ಬಾಕಿ ಇದೆ. ಶುಕ್ರವಾರ ಅಮವಾಸ್ಯೆ ಇರುವುದರಿಂದ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಇದರಿಂದಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭಾರೀ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಬರುವ ಸಾಧ್ಯತೆ ಇರುವುದರಿಂದ, ಸಂಭ್ರಮಿಸಲು ಸೇರುವ ಸಾಧ್ಯತೆ ಇರುವುದರಿಂದ ಖಾಕಿ ಭದ್ರತೆ ಹೆಚ್ಚಿಸಲಾಗಿದೆ.
ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಇಂಧನ ಹಾಗೂ ನೀರಾವರಿ ಖಾತೆ ಮೇಲೆ ಡಿಕೆ ಶಿವಕುಮಾರ್ ಇಚ್ಚೆ ಇದೆ ಎನ್ನುವ ಮಾಹಿತಿ ಸಿಗುತ್ತಿದೆ. ಡಿಕೆ ಶಿವಕುಮಾರ್ ಕೂಡ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಭಾರಿ ಜಯಭೇರಿ ಬಾರಿಸಿದರೂ ಮುಖ್ಯಮಂತ್ರಿ ಹೆಸರನ್ನು ಘೋಷಿಸಲು ಕಾಂಗ್ರೆಸ್ ಪಕ್ಷಕ್ಕೆ ಕಷ್ಟವಾಗಿತ್ತು. ಕಳೆದ ಮೂರು ದಿನಗಳಿಂದ ಪಕ್ಷದಲ್ಲಿ ಮುಖ್ಯಮಂತ್ರಿ ಹೆಸರು ಚರ್ಚೆಯಾಗುತ್ತಿದ್ದು, ಇನ್ನೂ ನಿರ್ಧಾರವಾಗಿರಲಿಲ್ಲ.ಸದ್ಯ ಫೈನಲ್ ಆಗಿದ್ದು ಹೈಕಮಾಂಡ್ ಘೋಷಣೆ ಮಾಡುವುದೊಂದೇ ಬಾಕಿ ಇದೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ, ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದರು. ಆದರೆ ಪಕ್ಷದ ಹೈಕಮಾಂಡ್ ಈ ಬಗ್ಗೆ ಇನ್ನೂ ಘೋಷಣೆ ಮಾಡಿಲ್ಲ.
ಮೂಲಗಳನ್ನು ನಂಬುವುದಾದರೆ, ಡಿಕೆ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಆದ್ದರಿಂದ ಇವು ಅವರ ಸಿಎಂ ಆಗುವ ಅವಕಾಶಗಲನ್ನು ಕಸಿದುಕೊಂಡಿವೆ. ಡಿಕೆ ಶಿವಕುಮಾರ್ ವಿರುದ್ಧ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಕೆಲವು ಪ್ರಕರಣಗಳನ್ನು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.
2017ರಲ್ಲಿ ಡಿಕೆ ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು ಎಂಬುದು ಗಮನಾರ್ಹ. ಡಿಕೆ ಶಿವಕುಮಾರ್ ಅವರೊಂದಿಗೆ ನೇರ ಸಂಪರ್ಕ ಹೊಂದಿದ್ದ ದೆಹಲಿಯ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದಾಗ 8.5 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ನವದೆಹಲಿಯ ಸಫ್ದರ್ಜಂಗ್ನಲ್ಲಿ ಡಿಕೆ ಶಿವಕುಮಾರ್ ಖರೀದಿಸಿದ್ದಾರೆ ಎನ್ನಲಾದ ಮೂರು ಫ್ಲ್ಯಾಟ್ಗಳ ಬಗ್ಗೆಯೂ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ಸಿಕ್ಕಿದೆ. ಲೆಕ್ಕಪರಿಶೋಧನೆ ಮಾಡದ 429 ಕೋಟಿ ರೂ.ಗಳ ಮಾಹಿತಿ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿಕೊಂಡಿದೆ.
[t4b-ticker]
+ There are no comments
Add yours