ಕ್ರಿಯಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ಡಿ.ಸುಧಾಕರ್

 

ಚಿತ್ರದುರ್ಗ: ಜಿಲ್ಲಾ ಖನಿಜ ನಿಧಿಯಡಿ (ಡಿಎಂಎಫ್) ಪ್ರಸ್ತುತ 115 ಕೋಟಿ ರೂ. ಗಳು ಸಂಗ್ರಹವಾಗಿದ್ದು, 2023 ರವರೆಗಿನ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಯಡಿ ಈಗಾಗಲೆ ಪ್ರಗತಿಯಲ್ಲಿರುವ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಇನ್ನೂ ಪ್ರಾರಂಭಗೊಳ್ಳದಿರುವ ಕಾಮಗಾರಿಗಳ ವಿವರ ಸಲ್ಲಿಸುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‍ನ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಅವರು ಮಾಹಿತಿ ನೀಡಿ, ಜಿಲ್ಲಾ ಖನಿಜ ನಿಧಿಯಡಿ ಪ್ರಸ್ತುತ 115 ಕೋಟಿ ರೂ. ಸಂಗ್ರಹವಿದೆ.  ಆದರೆ ಗಣಿಬಾಧಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ವಿವಿಧ ಇಲಾಖೆಗೆ ಸಂಬಂಧಿಸಿದ 2023 ರವರೆಗಿನ ಅನುಮೋದಿತ ಕ್ರಿಯಾ ಯೋಜನೆಯಡಿ ನಾನಾ ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿವೆ.  ಈಗ ಸಂಗ್ರಹವಿರುವ 115 ಕೋಟಿಯಲ್ಲಿ ಹಿಂದಿನ ಮೂರು ವರ್ಷಗಳ ಅವಧಿಯ ಕ್ರಿಯಾ ಯೋಜನೆಯಂತೆ ಹಾಗೂ ಮುಂದುವರೆದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಸಲುವಾಗಿಯೇ 100 ಕೋಟಿ ರೂ. ಅಗತ್ಯವಿದೆ ಎಂದರು.  ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಪ್ರಾರಂಭವಾಗದೇ ಇರುವ ಕಾಮಗಾರಿಗಳು ಹಾಗೂ ನಿಗದಿಪಡಿಸಿರುವ ಅನುದಾನದ ವಿವರವನ್ನು ಸಲ್ಲಿಸುವಂತೆ ಹಾಗೂ ಈ ಕುರಿತು ಆಯಾ ಕ್ಷೇತ್ರದ ಶಾಸಕರುಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು ವೇದಾವತಿ ನದಿಗೆ 2 ಕೋಟಿ ರೂ. ವೆಚ್ಚದಲ್ಲಿ ಬ್ಯಾರೇಜ್ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಬ್ಯಾರೇಜ್ ನಿರ್ಮಾಣ ಕಾರ್ಯದ ಗುಣಮಟ್ಟ ಕಳಪೆಯಾಗಿದೆ.  ಹೀಗಾಗಿ ಇದರ ಬಗ್ಗೆ ಅನ್ಯ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಪರಿಶೀಲನೆ ನಡೆಸಬೇಕಿದೆ.  ವಾಣಿವಿಲಾಸ ಸಾಗರ ಜಲಾಶಯದ ಹಿನ್ನೀರಿನ ಮುಳುಗಡೆ ಪ್ರದೇಶದಲ್ಲಿ 02 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಕ್ಕಾಗಿ ನಿರ್ಮಿತಿ ಕೇಂದ್ರದಿಂದ ಕಟ್ಟಡ ನಿರ್ಮಿಸಲಾಗುತ್ತಿದೆ.  ಇಲ್ಲಿಗೆ ತಲುಪಲು ತೆಪ್ಪದಲ್ಲಿ ತೆರಳಬೇಕು, ಅಲ್ಲದೆÉ ಇದಕ್ಕೆ ವಿಶ್ವೇಶ್ವರಯ್ಯ ಜಲ ನಿಗಮ ಸೇರಿದಂತೆ ಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ, ಹೀಗಾಗಿ ಇದು ಅಕ್ರಮವಾಗಿದೆ.  ನೀರು ಮುಳುಗಡೆಯ ನಡುಗಡ್ಡೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಟ್ಟಡ ಕಟ್ಟುವುದು ಸಮಂಜಸವಲ್ಲ.  ಕೌಶಲ್ಯ ಅಭಿವೃದ್ಧಿಗೆ ತರಬೇತಿ ಕೇಂದ್ರವನ್ನು ಹೋಬಳಿ ಅಥವಾ ತಾಲ್ಲೂಕು ಕೇಂದ್ರದಲ್ಲಿ ತೆರೆಯಲಿ, ಅದು ಬಿಟ್ಟು ಜಲಾಶಯದ ನೀರು ಮುಳುಗಡೆಯ ಪ್ರದೇಶದಲ್ಲಿ ಕಟ್ಟುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.  ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವೇದಾವತಿ ನದಿಗೆ ಕಟ್ಟಿರುವ ಬ್ಯಾರೇಜ್‍ನ ಗುಣಮಟ್ಟದ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು, ಅಲ್ಲದೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರ ಕಟ್ಟಡ ನಿರ್ಮಾಣದ ಬಗ್ಗೆ ವರದಿ ಪಡೆದು ಕ್ರಮ ವಹಿಸಲಾಗುವುದು ಎಂದರು.
ಡಿಎಂಎಫ್ ನಿಧಿಯಡಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಮಾಡಬೇಕಿದ್ದು, ಇದುವರೆಗೂ ಪೂರ್ಣಗೊಂಡಿಲ್ಲ,  ಆರ್‍ಒ ಘಟಕ ನಿರ್ಮಾಣಕ್ಕೆ ಇನ್ನೂ ಎಷ್ಟು ವರ್ಷ ಕಾಯಬೇಕು ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಪ್ರಶ್ನಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್ ಅವರು, ಇನ್ನು 20 ದಿನಗಳ ಒಳಗಾಗಿ ಎಲ್ಲ ಆರ್.ಒ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.
ನಿರ್ಮಿತಿ ಕೇಂದ್ರದಿಂದ ಕೈಗೊಳ್ಳಲಾಗುತ್ತಿರುವ ಎಲ್ಲ ಕಾಮಗಾರಿಗಳು ಹಾಗೂ ಪ್ರಸ್ತುತ ಸ್ಥಿತಿಗತಿ ಕುರಿತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು, ಖುದ್ದು ಸ್ಥಳಕ್ಕೆ ಭೇಟಿ ನೀಡಿ, ಆರ್ಥಿಕ ಹಾಗೂ ಭೌತಿಕ ಸಾಧನೆ ಕುರಿತಂತೆ ಒಂದು ತಿಂಗಳ ಒಳಗಾಗಿ ವರದಿ ಸಿದ್ಧಪಡಿಸಬೇಕು, ಹಾಗೂ ವರದಿಯೊಂದಿಗೆ ಆಯಾ ಕ್ಷೇತ್ರದ ಶಾಸಕರನ್ನು ಸಂಪರ್ಕಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅನುದಾನ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ವಿವರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
       ಜಿಲ್ಲೆಯಲ್ಲಿ ಗಸ್ತು ಕಾರ್ಯಾಚರಣೆಗೆ ಪೊಲೀಸ್ ಇಲಾಖೆಗೆ ವಾಹನ ಹಾಗೂ ಮಾಧ್ಯಮ ಸಮನ್ವಯಕ್ಕಾಗಿ ವಾರ್ತಾ ಇಲಾಖೆಗೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಆಡಳಿತಾತ್ಮಕ ಅನುದಾನದಡಿ ವಾಹನ ಒದಗಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಸಭೆಯಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಚಳ್ಳಕೆರೆ ಶಾಸಕ ರಘುಮೂರ್ತಿ, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಸಿಇಒ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours