ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಕೆ.ಹೆಚ್.ಮುನಿಯಪ್ಪ ಕರೆ

 

*ಚಿತ್ರದುರ್ಗದಲ್ಲಿ ಮಾದಿಗ ಮುಖಂಡರ ಸಭೆ*

ಚಿತ್ರದುರ್ಗ :ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಚಿಂತನೆಯುಳ್ಳ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುತ್ತದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ನಗರದ ಎನ್.ಬಿ.ಟಿ.ಹಾಲ್‍ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಗೋವಿಂದ ಕಾರಜೋಳ ಅವರು ತಪ್ಪುಹೆಜ್ಜೆ ಇಟ್ಟಿದ್ದಾರೆ. ಧರ್ಮ ಅಧರ್ಮದ ನಡುವೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಧರ್ಮದ ಪರವಾಗಿರುವ ಸರಳ ಸಜ್ಜನ ಬಿ.ಎನ್.ಚಂದ್ರಪ್ಪ ಅವರ ಗೆಲುವು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಾಗಿದೆ ಎಂದರು.

ರಾಜ್ಯದಲ್ಲಿ ಕೋಲಾರ ಮತ್ತು ಚಿತ್ರದುರ್ಗ ಎರಡು ಕಡೆ ಮಾದಿಗ ಸಮುದಾಯಕ್ಕೆ ಟಿಕೆಟ್ ತರಬೇಕಾದರೆ ಸಾಕಷ್ಟು ಹೋರಾಟ ನಡೆಸಬೇಕಾಯಿತು. ಸೀಟು ತಪ್ಪಿಸುವ ಹುನ್ನಾರವು ನಡೆಯಿತು. ಎಲ್ಲವನ್ನು ಮೀರಿ ದೊಡ್ಡ ಸಂಖ್ಯೆಯ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಬಾರದೆಂದು ಎ.ಐ.ಸಿ.ಸಿ. ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಸಮುದಾಯಕ್ಕೆ ಟಿಕೇಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಈ ಅವಕಾಶ ಬಳಸಿಕೊಳ್ಳಬೇಕು. ಎರಡು ಲಕ್ಷ ಮತಗಳ ಅಂತರದಲ್ಲಿ ಚಂದ್ರಪ್ಪ ಗೆಲ್ಲಬೇಕು ಎಂದು ಹೇಳಿದರು.

ಚಿತ್ರದುರ್ಗ ಹಾಗೂ ಕೋಲಾರ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಶೋಷಿತರು, ಅಲ್ಪಸಂಖ್ಯಾತರು, ದಲಿತರು ಶಾಂತವಾಗಿರಬಹುದು. ಕೋಮು ಗಲಭೆಗಳು ನಡೆಯುವುದಿಲ್ಲ. ಕೇವಲ ಮಾದಿಗರಷ್ಟೆ ಅಲ್ಲ ಎಲ್ಲ ಜಾತಿಯವರನ್ನು ವಿಶ್ವಾಸ ಗಳಿಸಿರುವ ಚಂದ್ರಪ್ಪ ಅವರ ಗೆಲುವು ಸುಲಭವಾಗಿದ್ದು, ದಾಖಲೆ ಮತಗಳ ಅಂತರದ ಗೆಲುವು ಅಗತ್ಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಐದು ಉಚಿತ ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ನೀಡಲಾಗಿದೆ. ಇದು ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಬದ್ಧತೆ ಎಂದರು.
ಎಲ್ಲಾ ವರ್ಗದವರನ್ನು ಹಸಿವುಮುಕ್ತವನ್ನಾಗಿಸಿ ಆಹಾರ ಭದ್ರತೆ ಕಾಯಿದೆ ಜಾರಿಗೆ ತಂದಿದ್ದು ನಮ್ಮ ಪಕ್ಷ. ಒಂದು ಕೋಟಿ ಇಪ್ಪತ್ತೆಂಟು ಲಕ್ಷ ಕುಟುಂಬ, ನಾಲ್ಕುವರೆ ಕೋಟಿ ಜನಕ್ಕೆ ಗ್ಯಾರಂಟಿ ಯೋಜನೆಯ ಲಾಭ ಸಿಕ್ಕಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಶಕ್ತಿ ಯೋಜನೆ ಈ ಬಾರಿಯ ಚುನಾವಣೆಯಲ್ಲಿ ಪಕ್ಷಕ್ಕೆ ವರದಾನವಾಗಲಿದೆ. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಬೇಕು ಎಂದು ತಿಳಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವರಿಷ್ಟರು ಕೋಲಾರ ಹಾಗೂ ಚಿತ್ರದುರ್ಗ ಮೀಸಲು ಕ್ಷೇತ್ರಗಳಲ್ಲಿ ಮಾದಿಗರಿಗೆ ಟಿಕೇಟ್ ನೀಡಿ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನನಗೂ ಸ್ಪರ್ಧಿಸುವಂತೆ ಕೇಳಿದರು. ರಾಷ್ಟ್ರ ರಾಜಕಾರಣ ಇಷ್ಟವಿಲ್ಲದ ಕಾರಣ ಬಿ.ಎನ್.ಚಂದ್ರಪ್ಪನವರನ್ನೆ ಸ್ಪರ್ಧಿಸುವಂತೆ ಹೇಳಿದೆ. ಅನೇಕ ಆಕಾಂಕ್ಷಿಗಳಿದ್ದರೂ ಬಿ.ಎನ್.ಚಂದ್ರಪ್ಪನವರನ್ನು ಸರ್ವ ಸಮ್ಮತ ಅಭ್ಯರ್ಥಿಯನ್ನಾಗಿ ಪಕ್ಷ ಘೋಷಿಸಿದೆ. ಮಾದಿಗ ಸಮುದಾಯ ಒಗ್ಗಟ್ಟಾಗಿ ಎಲ್ಲ ಜಾತಿ ಜನರ ವಿಶ್ವಾಸ ಗಳಿಸಿ ರಾಜಕೀಯವಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ತಿಳಿಸಿದರು.

ಅಹಿಂದ ವರ್ಗದವರು ಒಗ್ಗೂಡಿ ಮತ ಚಲಾಯಿಸಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯಿತು. ಈ ಫಲಿತಾಂಶ ಲೋಕಸಭಾ ಚುನಾವಣೆಯಲ್ಲೂ ಮರುಕಳಿಸಲಿದ್ದು, ಸಮುದಾಯದವರು ಹೆಚ್ಚು ಶ್ರಮ ವಹಿಸಬೇಕು ಎಂದರು.

ಯಾವುದೇ ಒಬ್ಬ ನಾಯಕ ಎಲ್ಲ ಜಾತಿ, ಧರ್ಮದವರು ಮೆಚ್ಚುವಂತಿರಬೇಕು. ಅಂತಹ ಗುಣ ಬಿ.ಎನ್.ಚಂದ್ರಪ್ಪ ಅವರಲ್ಲಿದೆ ಎಂದು ಹೇಳಿದರು.

ಚಂದ್ರಪ್ಪ ಅವರನ್ನು ಗೆಲ್ಲಿಸಲು ಈಗಾಗಲೇ ಜಿಲ್ಲಾ ಮಂತ್ರಿ ಡಿ.ಸುಧಾಕರ್ ನೇತೃತ್ವದಲ್ಲಿ ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಡಿಕೊಂಡು ತಿರುಗುತ್ತಿದ್ದಾರೆ. ಅವರೆಲ್ಲರಿಗೂ ಮಾದಿಗ ಸಮುದಾಯ ಕೃತಜ್ಞತೆ ಸಲ್ಲಿಸಲಿದೆ ಎಂದರು.

ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಎಸ್.ಸಿ.ಎಸ್.ಪಿ. ಟಿ.ಎಸ್.ಪಿ. ಕಾಯಿದೆಯನ್ನು ಜಾರಿಗೊಳಿಸಿದೆ. 36 ಸಾವಿರ ಕೋಟಿ ರೂ. ಅನುದಾನ ಎಸ್ಸಿ, ಎಸ್ಟಿಗೆ ಬಳಕೆ ಆಗಲಿ ಎಂಬುದು ಉದ್ದೇಶ. ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ಮಾದಿಗ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧತೆ ತೋರಿದೆ ಎಂದರು.

ಮಾದಿಗ ಸಮಾಜ ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕಾಗಿರುವುದರಿಂದ ಮಾದಿಗ ಜನಾಂಗ ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಮಾದಿಗ ಸಮುದಾಯದಲ್ಲಿ ನಾಯಕತ್ವವನ್ನು ಕುಂದಿಸುವಂತ ಕೆಲಸವಾಗುತ್ತಿರುವುದರಿಂದ ಹೆಚ್.ಆಂಜನೇಯ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಸೋಲಬೇಕಾಯಿತು ಎಂದು ಬೇಸರಿಸಿದರು.ಎಲ್ಲರೂ ಒಂದಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿ.ಎನ್.ಚಂದ್ರಪ್ಪನ ಅವರನ್ನು ಗೆಲ್ಲಿಸಬೇಕಿದೆ ಎಂದು ಹೇಳಿದರು.
ಸಂವಿಧಾನ ಬದಲಾವಣೆ ಮಾಡಲು ಹೊರಟಿರುವ ಬಿಜೆಪಿಯಲ್ಲಿಯೂ ಮಾದಿಗ ಸಮುದಾಯದ ಮುಖಂಡರು ಇದ್ದಾರೆ. ಇದು ಅತ್ಯಂತ ನಾಚಿಕೆ, ಆತಂಕದ ವಿಷಯ.ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾಗಿದೆ. ನಮ್ಮ ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲೇಬೇಕು. ಮಾದಿಗರೆಲ್ಲಾ ಒಂದಾಗಿ ಬಿಜೆಪಿಯನ್ನು ಮಣಿಸಬೇಕು. ರಾಜ್ಯದಲ್ಲಿ ಅರವತ್ತರಿಂದ ಎಪ್ಪತ್ತು ಲಕ್ಷ ಮಾದಿಗರಿದ್ದೇವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಾದಿಗ ಮತದಾರರಿದ್ದಾರೆ. ಮನುವಾದಿಗಳ ಕೈಗೆ ಅಧಿಕಾರ ಕೊಡಬಾರದೆಂದರೆ ಕಾಂಗ್ರೆಸ್‍ನ ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ಸಂವಿಧಾನ ಉಳಿಸುವ ಚುನಾವಣೆ ಇದಾಗಿರುವುದರಿಂದ ಮಾದಿಗ ಸಮುದಾಯ ಎಚ್ಚರಿಕೆಯಿಂದ ಮತ ಚಲಾಯಿಸಬೇಕಿದೆ. ಮನುವಾದಿಗಳು, ಭೀಮವಾದಿಗಳ ನಡುವಿನ ಚುನಾವಣೆಯಲ್ಲಿ ಗೆಲುವು ನಮ್ಮದಾಗಬೇಕು. ಮುದೋಳ, ಬಾಗಲಕೋಟೆಯಲ್ಲಿ ಸಾಕಷ್ಟು ಅಭಿವೃದ್ದಿ ಮಾಡಿದ್ದೇನೆಂದು ಹೇಳಿಕೊಳ್ಳುತ್ತಿರುವ ಗೋವಿಂದ ಕಾರಜೋಳ ಏಕೆ ಸೋತರು ಎಂದು ಪ್ರಶ್ನಿಸಿದ ಬಿ.ಎನ್.ಚಂದ್ರಪ್ಪ, ಬಿಜೆಪಿಯ ಪೊಳ್ಳು ಭರವಸೆಗಳು ಇಲ್ಲಿ ನಡೆಯುವುದಿಲ್ಲ. ಬಹುಮತಗಳಿಂದ ಗೆಲ್ಲಿಸಿ ನನ್ನನ್ನು ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ಮಾದಿಗ ಸಮುದಾಯದವರಲ್ಲಿ ಮನವಿ ಮಾಡಿದರು.

ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಸದಸ್ಯೆ ಗೀತಾನಾಗಕುಮಾರ್, ಚಿಂತಕ ಕೊಟ್ಟ ಶಂಕರ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋಪಾಲಕೃಷ್ಣ, ಬಿ.ಪಿ.ಪ್ರಕಾಶ್ ಮೂರ್ತಿ, ಆರ್.ನರಸಿಂಹರಾಜ, ಮುಖಂಡರಾದ ಡಿ.ಎನ್.ಮೈಲಾರಪ್ಪ, ಜಿ.ಎಲ್.ಮೂರ್ತಿ, ಪಾಂಡುರಂಗಸ್ವಾಮಿ, ವೀರಭದ್ರಪ್ಪ, ರಂಗ್ವಾಮಿ, ಮಲ್ಲೇಶಪ್ಪ, ತಿಪ್ಪಮ್ಮ, ಗೀತಮ್ಮ, ಸುಜಾತಮ್ಮ, ಎಂ.ಡಿ.ರವಿ, ಬಿ.ಪಿ.ತಿಪ್ಪೇಸ್ವಾಮಿ, ಹರೀಶ್, ಜಯಣ್ಣ, ಕೆ.ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಎಸ್.ಜಗದೀಶ್, ಕೆ.ರಾಜಣ್ಣ, ಮಲ್ಲೇಶ್ ಉಪಸ್ಥಿತರಿದ್ದರು.

 

 

*ಮಾದಿಗ ಸಮುದಾಯದಿಂದ ಕೃತಜ್ಞತೆಗಳ ನಿರ್ಣಯ*

1. ಮಾದಿಗ ಸಮುದಾಯಕ್ಕೆ ಲೋಕಸಭಾ ಟಿಕೆಟ್ ನೀಡಿರುವುದಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ.

2. ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರಿಗೆ ಪ್ರೀತಿ ತೋರುತ್ತಿರುವ ಲೋಕಸಭಾ ಕ್ಷೇತ್ರದ ಎಲ್ಲ ಜಾತಿ ಸಮುದಾಯದವರಿಗೆ ಕೃತಜ್ಞತೆ.

3. ಜಿಲ್ಲಾ ಮಂತ್ರಿ ಡಿ.ಸುಧಾಕರ್ ನೇತೃತ್ವದಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಹೆಚ್ಚು ಮತ ತಂದುಕೊಡಲು ಶ್ರಮಿಸುತ್ತಿರುವ ಲೋಕಸಭಾ ಕ್ಷೇತ್ರದ ಎಲ್ಲ ಶಾಸಕರುಗಳಿಗೆ ಕೃತಜ್ಞತೆ.

[t4b-ticker]

You May Also Like

More From Author

+ There are no comments

Add yours