ಮಂಗಳೂರು, ಜು. 2: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲೆಯ 88 ಪ್ರದೇಶಗಳನ್ನು ಅತಿ ಹೆಚ್ಚು ಅಪಾಯದ ವಲಯ (Danger Zone)ಎಂದು ಗುರುತಿಸಿದೆ. ಮಳೆಗಾಲದಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತಗಳಲ್ಲಿ 17 ಮಂದಿ ಮೃತಪಟ್ಟಿದ್ದು, ಪ್ರಸಕ್ತ ವರ್ಷವೂ ಈಗಾಗಲೇ ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೂಕುಸಿತದ ಅಪಾಯ ಎದುರಿಸುತ್ತಿರುವ ಪ್ರಮುಖ ಪ್ರದೇಶಗಳಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್, ನೆರಿಯ, ಶಿಶಿಲ, ಮಂಗಳೂರು ಸಮೀಪದ ಕೆತ್ತಿಕಲ್ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಹಾಗೂ ಉಳ್ಳಾಲ ಭಾಗಗಳ ಹಲವು ಪ್ರದೇಶಗಳು ಸೇರಿವೆ.ಐಐಟಿ ಧಾರವಾಡ ನಡೆಸಿದ ವೈಜ್ಞಾನಿಕ ಅಧ್ಯಯನ ಮತ್ತು ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಶ್ಲೇಷಣೆಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಶೇ.24ಕ್ಕೂ ಹೆಚ್ಚು ಭೂಭಾಗ ಭೂಕುಸಿತದ ಅಪಾಯದಲ್ಲಿದೆ ಎಂದು ವರದಿಯಾಗಿದೆ.
ತಜ್ಞರ ಅಭಿಪ್ರಾಯದಂತೆ, ಗುಡ್ಡ ಪ್ರದೇಶಗಳಲ್ಲಿ ಅತಿಯಾದ ಭೂ ಅಭಿವೃದ್ಧಿ, ಅಕ್ರಮ ಗುಡ್ಡ ಕಟಾವು ಹಾಗೂ ನಿರಂತರ ಮಳೆಯಿಂದ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಾಗಿದೆ. ಮಳೆಗಾಲದ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಈಗಾಗಲೇ 115 ಪರಿಹಾರ ಕೇಂದ್ರಗಳನ್ನು ಸಿದ್ಧಪಡಿಸಿದ್ದು, ಅಗತ್ಯವಿದ್ದರೆ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನೂ ನಿಯೋಜಿಸಿದೆ. ಅಪಾಯದ ಪ್ರದೇಶಗಳಲ್ಲಿ ವಾಸಿಸುವ ಜನರು ಅಧಿಕಾರಿಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮನೆಗಳನ್ನು ತಾತ್ಕಾಲಿಕವಾಗಿ ಖಾಲಿ ಮಾಡುವಂತೆ ಸೂಚಿಸಿದರೆ ಯಾವುದೇ ಹಿಂಜರಿಕೆ ಮಾಡದೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಮಳೆಗಾಲದಲ್ಲಿ ಭೂಕುಸಿತದ ಅಪಾಯವನ್ನು ನಿರ್ಲಕ್ಷಿಸಬಾರದು. ಜೀವಕ್ಕಿಂತ ಆಸ್ತಿ ದೊಡ್ಡದಲ್ಲ ಎಂಬುದನ್ನು ಅರಿತು, ಎಚ್ಚರಿಕೆ ಸಂದೇಶಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರಿಂದ ಸಂಭವನೀಯ ಅನಾಹುತಗಳನ್ನು ತಪ್ಪಿಸಬಹುದಾಗಿದೆ.



