ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್ಡಿಎಂ ಐಟಿಐ), ವೇಣೂರಿನಲ್ಲಿ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಡಾ. ಎಸ್. ಎನ್. ಕಾಕತ್ಕರ್ ವಹಿಸಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು, ಕೈಗಾರಿಕಾ ತರಬೇತಿಯೊಂದಿಗೆ ಉತ್ತಮ ವ್ಯಕ್ತಿತ್ವ, ಶಿಸ್ತು, ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದರು. ದೇಶದ ಕೈಗಾರಿಕಾ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸದಾ ಸಜ್ಜಾಗಿರಬೇಕು ಎಂದು ಅವರು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅರವಿಂದ್ ಮೋಟಾರ್ಸ್, ಮಂಗಳೂರು ಸಂಸ್ಥೆಯ ಉಪ ಮಹಾಪ್ರಬಂಧಕರಾದ ಶ್ರೀ ರಾಜಶೇಖರ್ ಪಿ. ಅವರು, ಇಂದಿನ ಕೈಗಾರಿಕಾ ಕ್ಷೇತ್ರದಲ್ಲಿ ತಾಂತ್ರಿಕ ಪರಿಣತಿಯ ಜೊತೆಗೆ ಸಮಯಪಾಲನೆ, ಸಂವಹನ ಕೌಶಲ್ಯ ಮತ್ತು ತಂಡದೊಂದಿಗೆ ಕಾರ್ಯನಿರ್ವಹಿಸುವ ಗುಣಗಳು ಅತ್ಯಂತ ಮುಖ್ಯವೆಂದು ತಿಳಿಸಿದರು. ತರಬೇತಿಯ ಅವಧಿಯಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯವನ್ನು ಜೀವನದಲ್ಲಿ ಸಮರ್ಥವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಎಸ್ಡಿಎಂ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್ಮೆಂಟ್ ಅಧಿಕಾರಿಯಾದ ಅಮರೇಶ್ ಹೆಬ್ಬಾರ್ ಅವರು, ಕೈಗಾರಿಕೆಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳು, ವೃತ್ತಿ ಬೆಳವಣಿಗೆ ಹಾಗೂ ಕೌಶಲ್ಯ ವೃದ್ಧಿಯ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
ವಿದ್ಯಾರ್ಥಿಗಳ ಪರವಾಗಿ ರೋಹಿತ್, ಪ್ರಜ್ಞೇಶ್ ಹಾಗೂ ಕುಮಾರಿ ಸ್ಯಾಂಡ್ರ ಡಿಸೋಜಾ ತಮ್ಮ ಅನುಭವಗಳನ್ನು ಹಂಚಿಕೊಂಡು, ಸಂಸ್ಥೆಯಲ್ಲಿ ಪಡೆದ ಗುಣಮಟ್ಟದ ತರಬೇತಿ, ಶಿಕ್ಷಕರ ಮಾರ್ಗದರ್ಶನ ಹಾಗೂ ಕೈಗಾರಿಕಾ ಸಂಪರ್ಕದಿಂದ ತಮ್ಮ ಭವಿಷ್ಯಕ್ಕೆ ಉತ್ತಮ ಅಡಿಪಾಯ ದೊರೆತಿದೆ ಎಂದು ಅಭಿಪ್ರಾಯಪಟ್ಟರು.
ಪೋಷಕರ ಪರವಾಗಿ ಶ್ರೀ ಧರ್ಣಪ್ಪ ಮೂಲ್ಯ ಹಾಗೂ ಶ್ರೀಮತಿ ಸುವರ್ಣ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶ್ರಮಿಸುತ್ತಿರುವ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ ಸಿಬ್ಬಂದಿಯನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿಗಳಾದ ಜಗನ್ನಾಥ ಎಚ್ ಇವರನ್ನು ಸನ್ಮಾಸಲಾಯಿತು. ತಮ್ಮ 3 ಜನ ಮಕ್ಕಳನ್ನು ಸಂಸ್ಥೆಯಲ್ಲಿ ತರಬೇತಿಗೊಳಿಸಿದ ಇಬ್ಬರು ಪೋಷಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವೆಲ್ಡರ್ ಟ್ರೇಡ್ನ ಸಂಪತ್ ಅವರಿಗೆ 100% ಹಾಜರಾತಿಯೊಂದಿಗೆ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿ (Best Outgoing Student) ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು.
ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಯಾದ ವಿದ್ಯಾರ್ಥಿನಿಯರಾದ ಪೂಜ್ಯ ಮತ್ತು ಪ್ರಭಾ ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರವಣ್ ಕುಮಾರ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕಿರಿಯ ತರಬೇತಿ ಅಧಿಕಾರಿಯಾದ ಸತೀಶ್ ಅವರು ನಿರೂಪಿಸಿದರು. ಸಮಾರಂಭದಲ್ಲಿ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ಗರು.



