ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣಾ ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಶ್ರೀರಾಮುಲು
ಚಿತ್ರದುರ್ಗ,ಜೂನ್23:
ಪ್ರಸ್ತುತ ದಿನಮಾನಗಳಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣ ಪಡೆಯುವ ಉದ್ದೇಶದಿಂದ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಲೀಡ್ ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಗರದ ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ 2020-21ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣಾ ಮತ್ತು ಐಸಿಟಿ ಯುಕ್ತ ಸ್ಮಾರ್ಟ್ ತರಗತಿ ಕೊಠಡಿಗಳ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಇಂತಹ ಸಂದರ್ಭದಲ್ಲಿ ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಣಕ್ಕೆ ವಿದ್ಯಾರ್ಥಿಗಳು ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡಲಾಗುತ್ತಿದೆ ಎಂದರು.
ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಜೊತೆಗೆ ರಾಜ್ಯಾದ್ಯಂತ 2500 ಸ್ಮಾರ್ಟ್ ಕ್ಲಾಸ್ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಗುತ್ತಿದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಖನಿಜ ನಿಗದ ಅಧ್ಯಕ್ಷ ಲಿಂಗಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಟಿ.ಎಲ್.ಸುಧಾಕರ್, ಪ್ರೊ.ಆರ್.ಕೆ.ರಂಗಸ್ವಾಮಿ, ಡಾ.ಸಿ.ಚನ್ನಕೇಶವ ಹಾಗೂ ಐಟಿ ಮತ್ತು ಐಕ್ಯೂಎಸಿ ಸಂಚಾಲಕರು, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
+ There are no comments
Add yours