ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ
ಸೋಂಕಿತರು ಕೋವಿಡ್ ಕೇರ್ ಸೆಂಟರ್ಗೆ ಬಂದು ಚಿಕಿತ್ಸೆ ಪಡೆಯಿರಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
****
ಚಿತ್ರದುರ್ಗ,ಮೇ.29:
ಕೋವಿಡ್ ಸೋಂಕು ದೃಢಪಟ್ಟವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯದೇ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು, ಚಿಕ್ಕಂದವಾಡಿ ಗ್ರಾಮ ಹಾಗೂ ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್ಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಸೋಂಕು ಹರಡಲಿದೆ. ಹಾಗಾಗಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಪ್ರತ್ಯೇಕ ಶೌಚಾಲಯ, ಹಾಸಿಗೆ ವ್ಯವಸ್ಥೆ, ಬಿಸಿನೀರು, ಊಟದ ವ್ಯವಸ್ಥೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಕೋವಿಡ್ ದೃಢಪಟ್ಟ ಕೂಡಲೇ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಬೇಕು. ಯಾವುದೇ ಕಾರಣಕ್ಕೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಾರದು. ಆರಂಭಿಕ ಹಂತದಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಸಿದರೆ ಬೇಗ ಗುಣಮುಖರಾಗಬಹುದು ಎಂದು ಹೇಳಿದರು.
ಸಂಸದರಾದ ಎ.ನಾರಾಯಣಸ್ವಾಮಿ ಮಾತನಾಡಿ, ಮನೆಯಿಂದ ಹೊರಗಡೆ ಹೋಗುವಾಗ ಪ್ರತಿಯೊಬ್ಬರು ಮಾಸ್ಕ್ (ಮುಖಗವಸು) ಧರಿಸಬೇಕು. ಯಾರಿಗಾದರೂ ಜ್ವರ, ಕೆಮ್ಮು, ನೆಗಡಿ ಅಂತಹ ಕೋವಿಡ್ ಲಕ್ಷಣಗಳು ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಕೋವಿಡ್ ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಬೇಕು. ಕೋವಿಡ್ ಕೇರ್ ಸೆಂಟರ್ನಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಸೋಂಕಿತರನ್ನು ಮಕ್ಕಳ ರೀತಿಯಲ್ಲಿ ಆರೈಕೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕರು ಹಾಗೂ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತುದ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು, ಚಿಕ್ಕಂದವಾಡಿ ಕೋವಿಡ್ ಕೇರ್ ಸೆಂಟರ್ ಹಾಗೂ ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಸಂಸದರಾದ ಎ.ನಾರಾಯಣಸ್ವಾಮಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಇದ್ದರು.
=====
[t4b-ticker]
+ There are no comments
Add yours