ಅನುಮತಿಸಲಾದ ಚಟುವಟಿಕೆಗಳಿಗೆ ಬೆಳಿಗ್ಗೆ 6 ರಿಂದ 10, ಕೃಷಿ ಚಟುವಟಿಕೆಗಳಿಗೆ ಮಧ್ಯಾಹ್ನ 12 ರವರೆಗೆ ಕಾರ್ಯನಿರ್ವಹಿಸಲು ಅವಕಾಶ
ಜೂನ್ 07 ರಿಂದ 14 ರವರೆಗೆ ಲಾಕ್ಡೌನ್ ವಿಸ್ತರಣೆ
*****
ಚಿತ್ರದುರ್ಗ,ಜೂನ್06:
ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಇದೇ ಜೂನ್ 07 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಲಾಕ್ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯದ ದೃಷ್ಠಿಯಿಂದ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಜೂನ್ 07 ರ ಬೆಳಿಗ್ಗೆ 6 ರಿಂದ ಜೂನ್ 14ರ ಬೆಳಿಗ್ಗೆ 6 ರವರೆಗೆ ಅನುಮತಿಸಲಾದ ಚಟುವಟಿಕೆಗಳನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಹಾಗೂ ಪ್ರಸ್ತುತ ಮುಂಗಾರು ಹಂಗಾಮು ಕೃಷಿ ಚಟುವಟಿಕೆಗಳು ಪ್ರಗತಿಯಲ್ಲಿರುವುದರಿಂದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಮಾತ್ರ ಮಧ್ಯಾಹ್ನ 12 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಮುಂದಿನ ದಿನದ ಮುಂಜಾನೆ 6 ರವರೆಗೆ ಸರ್ಕಾರಿ ಆದೇಶದ ಅನುಬಂಧದಲ್ಲಿ ಪ್ರಾಸ್ತಾಪಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಿ ಆದೇಶಿಸಲಾಗಿದೆ.
ಈ ಆದೇಶದ ಪರಿಣಾಮಕಾರಿ ಜಾರಿಗೆ ಕ್ರಮಕೈಗೊಳ್ಳಲು ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲ ತಾಲ್ಲೂಕಿನ ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಯಲ್ಲಿ ಪ್ರಾಸ್ತಾಪಿಸಿರುವ ವಿವಿಧ ವಲಯವಾರು ಚಟುವಟಿಕೆಗಳ ನಿರ್ಬಂಧಗಳ ಬಗ್ಗೆ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ನಿಯಮಿತವಾಗಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮುಖ್ಯಸ್ಥರುಗಳಿಗೆ ಸೂಚಿಸಿದೆ.
ಸರ್ಕಾರದ ಆದೇಶ ಅನುಬಂಧದಲ್ಲಿ ಪ್ರಸ್ತಾಪಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ಸಾಮಾಜಿಕ ಅಂತರ ಹಾಗೂ ಸೂಕ್ತ ಎಚ್ಚರಿಕಾ ಕ್ರಮಗಳನ್ನು ಅನುಸರಿಸಿ ಮುಂದುವರೆಸಲು ಅವಕಾಶ ನೀಡಲಾಗಿದೆ. ವೈಯಕ್ತಿಕ ಓಡಾಟಗಳು, ಅನಿವಾರ್ಯವಲ್ಲದ ಚಟುವಟಿಕೆಗಳ ಕಾರ್ಯನಿರ್ವಹಣೆಯು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದ್ದು, ಇದನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆಯನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
[t4b-ticker]
+ There are no comments
Add yours