ಬೆಂಗಳೂರು, ಜ. ೩- ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕು ಪ್ರಕರಣಗಳಿಗೆ ತಡೆಹಾಕಲು ಲಾಕ್ಡೌನ್ ಜಾರಿ ಸೇರಿದಂತೆ, ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ನಾಳೆ ತಜ್ಞರ ಜೊತೆ ಚರ್ಚಿಸಿ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೋವಿಡ್ ಹಾಗೂ ಒಮಿಕ್ರಾನ್ ಸ್ಥಿತಿಗತಿಗಳನ್ನು ಗಮನಿಸಲಾಗುತ್ತಿದೆ. ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಳೆ ಸಂಜೆ ತಜ್ಞರ ಜೊತೆ ಸಮಾಲೋಚನೆ ನಡೆಸುವುದಾಗಿ ಅವರು ಹೇಳಿದರು.
ಕೋವಿಡ್ ಒಂದನೇ ಮತ್ತು ಎರಡನೇ ಅಲೆಯಲ್ಲಿ ಅನುಭವಿಸಿದ ಸಂಕಷ್ಟ, ತಜ್ಞರ ಸಲಹೆ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಠಿಣ ಕ್ರಮ ಜಾರಿಗೊಳಿಸುವ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ತಡೆಗೆ ಲಾಕ್ಡೌನ್ ಜಾರಿಗೊಳಿಸಬೇಕೆ? ಸೆಮಿಲಾಕ್ಡೌನ್ ಜಾರಿಗೊಳಿಸಬೇಕೆ? ಯಾವ ರೀತಿ ನಿರ್ಬಂಧಗಳನ್ನು ಜಾರಿ ಮಾಡಬೇಕು ಎಲ್ಲದರ ಬಗ್ಗೆ ಸಚಿವ ಸಹೋದ್ಯೋಗಿಗಳೊಂದಿಗೆ ಮಾತಾಡಿ ತೀರ್ಮಾನ ಮಾಡುವುದಾಗಿ ಅವರು ಹೇಳಿದರು.
[t4b-ticker]
+ There are no comments
Add yours